ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಫಲಿತಾಂಶ ನಿಮ್ಮದಾಗಲಿದೆ.
ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶುಭಹಾರೈಕೆ : ಡಿಸಿ ಎಂ.ಎಸ್.ದಿವಾಕರ್.
ವಿಜಯನಗರ (ಹೊಸಪೇಟೆ), ತ್ಯಾಗಭೂಮಿ ಡಿಜಿಟಲ್ ಡೆಸ್ಕ್ :
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳೇ ‘ಅಲ್ ದಿ ಬೆಸ್ಟ್’, ಪರೀಕ್ಷೆಗಳನ್ನು ಆತ್ಮ ವಿಶ್ವಾಸದಿಂದ ಬರೆಯಿರಿ, ಉತ್ತಮ ಫಲಿತಾಂಶ ನಿಮ್ಮದಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಮಾ.೨೧ ರಿಂದ ಆರಂಭವಾಗಲಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯನಗರ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಪರೀಕ್ಷೆಗಳನ್ನು ಎದುರಿಸಿ ಇಡೀ ಜಿಲ್ಲೆಗೆ ಉತ್ತಮ ಫಲಿತಾಂಶದ ನೀಡಲಿದ್ದಾರೆ ಎಂಬ ಭರವಸೆ ಇದೆ. ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ವಯ ಅಚ್ಚುಕಟ್ಟಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಪರೀಕ್ಷೆಗಳ ಬಗ್ಗೆ ಸುಳ್ಳು ವದಂತಿಗಳನ್ನು ಹರಡಿದರೇ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಪರೀಕ್ಷೆಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮ ಚಟುವಟಿಕೆಗಳು ನಡೆಯದಂತೆ ಪರೀಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ ೩೪೦ ಶಾಲೆಗಳಿವೆ ಇವುಗಳಲ್ಲಿ ೧೨೦ ಸರ್ಕಾರಿ ಶಾಲೆಗಳು, ೩೨ ವಸತಿ ಶಾಲೆಗಳು, ೭೪ ಅನುದಾನಿತ ಶಾಲೆಗಳು ಮತ್ತು ೧೧೪ ಅನುದಾನ ರಹಿತ ಶಾಲೆಗಳು ಇವೆ. ಒಟ್ಟು ಜಿಲ್ಲಾದ್ಯಾಂತ ೭೧ ಪರೀಕ್ಷಾ ಕೇಂದ್ರಗಳಿವೆ. ಈ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ ೨೧,೪೨೯ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ಮತ್ತು ಖಾಸಗಿ ೧೨೭೧ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೨೨೭೦೦ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಎದುರಿಸಲಿದ್ದಾರೆ. ಫಲಿತಾಂಶ ಸುಧಾರಣೆಗಾಗಿ ಶಾಲೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗಿದ್ದು, ಕಲಿಕೆಯಲ್ಲಿ ಹಿಂದುಳಿದ ೬೬೧೧ ವಿದ್ಯಾರ್ಥಿಗಳನ್ನು ಗುರುತಿಸಿ. ಪ್ರತ್ಯೇಕವಾಗಿ ತರಬೇತಿ ನೀಡಿ ಉತ್ತೀರ್ಣರಾಗಲು ಸಶಕ್ತರನ್ನಾಗಿಸಲಾಗಿದೆ. ಈ ಬಾರಿ ವಿದ್ಯಾರ್ಥಿಗಳ ಮೇಲೆ ಭರವಸೆ ಇದ್ದು, ರಾಜ್ಯದ ಐದನೇ ಸ್ಥಾನದಲ್ಲಿ ಫಲಿಶಾಂಶ ಪಡೆಯಲಿದ್ದೇವೆ ಎಂಬ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಊಹಾಪೋಹಗಳಿಗೆ ಕಿವಿಗೊಡದೇ, ವಿಶ್ವಾಸದಿಂದ ಪರೀಕ್ಷೆಗಳನ್ನು ಬರೆದು ಉತ್ತಮ ಫಲಿತಾಂಶವನ್ನು ಗಿಟ್ಟಿಸಿಕೊಳ್ಳಬೇಕು. ಜಿಲ್ಲಾದ್ಯಾಂತ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಇಲಾಖೆ ಬಿಗಿಬಂದೋಬಸ್ತ್ ಮಾಡಲಿದೆ. ಪರೀಕ್ಷಾ ಮುಖ್ಯ ಅಧೀಕ್ಷಕರು ಮಾರ್ಗಸೂಚಿಗಳನ್ನು ಅರ್ಥೈಸಿಕೊಂಡು ಅದರಂತೆ ಕರ್ತವ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ರಕ್ಷಣಾತ್ಮಕ ಕಾಪೌಂಡು ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪರೀಕ್ಷಾ ಕೇಂದ್ರದಲ್ಲಿನ ಸಿಸಿ ಕ್ಯಾಮೆರಾಗಳು, ವೆಬ್ ಕಾಸ್ಟಿಂಗ್ಗೆ ಪೂರಕ ಇಂಟರ್ನೆಟ್ ವ್ಯವಸ್ಥೆಯನ್ನು ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಮತ್ತು ಪರೀಕ್ಷಾ ಅವಧಿಯಲ್ಲಿ ಕೊಠಡಿ ಮೇಲ್ವಿಚಾರಕರು ಮೊಬೈಲ್ ಬಳಕೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ. ಪರೀಕ್ಷಾ ದಿನದಂತೆ ನಿಗಧಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ಖಜಾನೆ ಇಲಾಖೆಯಲ್ಲಿನ ಪ್ರಶ್ನೆ ಪತ್ರಿಕೆಗಳನ್ನು ಸೂಕ್ತ ಪೊಲೀಸ್ ರಕ್ಷಣೆಯೊಂದಿಗೆ ಆಯಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳು ನಿಗಾ ವಹಿಸಬೇಕು. ಮುಖ್ಯೋಪಾಧ್ಯಾಯರು ಮತ್ತು ಪರೀಕ್ಷಾ ಅಧೀಕ್ಷಕರು ಸಮನ್ವಯತೆಯಿಂದ ಪರೀಕ್ಷೆಗಳನ್ನು ನಿರ್ವಹಿಸಬೇಕೆಂದು ಈಗಾಗಲೇ ಸಭೆ ನಡೆಸಿ ತಿಳಿಸಲಾಗಿದೆ ಎಂದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಅಲ್ದಿ ಬೆಸ್ಟ್ : ಡಿಸಿ ಎಂ.ಎಸ್.ದಿವಾಕರ್.
RELATED ARTICLES